ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ಆದೇಶ ರಾಜಕೀಯಪ್ರೇರಿತ: ಅಶೋಕ್


ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶ ಅತ್ಯಂತ ಜನವಿರೋಧಿ ನಡೆಯಾಗಿದ್ದು, ಇದು ರಾಜಕೀಯ ಪ್ರೇರಿತ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಡವರು, ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ಗುಣಮಟ್ಟದ ಒದಗಿಸುತ್ತಿರುವ ಜನ ಔಷಧಿ ಕೇಂದ್ರಗಳಿಗೆ ಅವಕಾಶ ನೀಡದಿರಲು ಕಾರಣವೇನು? ಸರ್ಕಾರಿ ಆಸ್ಪತ್ರೆಗಳ ವೈದ್ಯರು ಜೆನೆರಿಕ್ ಔಷಧಿ ಚೀಟಿ ಬರೆಯುವುದಕ್ಕೂ ಜನಔಷಧಿ ಕೇಂದ್ರಗಳಿಗೆ ಅವಕಾಶ ನೀಡದಿರುವುದಕ್ಕೂ ಸಂಬಂಧವೇನು? ಎಂದು ಪ್ರಶ್ನಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ ಎನ್ನುವ ಕಾರಣಕ್ಕೆ ಬೇರೆ ಹೋಟೆಲ್ ಗಳನ್ನು ತೆರೆಯಲು ಅವಕಾಶ ನೀಡುವುದಿಲ್ಲ ಎನ್ನಲು ಸಾಧ್ಯವೇ?. ಜನರು ತಮಗೆ ಸಕಾಲಕ್ಕೆ, ಕೈಗೆಟಕುವ ಬೆಲೆಗೆ, ಉತ್ತಮ ಗುಣಮಟ್ಟದ ಔಷಧಿ ಎಲ್ಲಿ ಸಿಗುತ್ತದೋ ಅಲ್ಲಿ ಖರೀದಿ ಮಾಡುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಕ್ಕರೆ ಅದನ್ನೇ ಪಡೆಯುತ್ತಾರೆ. ಅದಕ್ಕಾಗಿ ಜನಔಷಧಿ ಕೇಂದ್ರಗಳನ್ನು ಮುಚ್ಚುವ ಅವಶ್ಯಕತೆ ಏನಿದೆ? ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ರಾಜ್ಯ ಸರ್ಕಾರ ಕಾರ್ಪೊರೇಟ್ ಔಷಧ ಕಂಪನಿಗಳು, ಖಾಸಗಿ ಮೆಡಿಕಲ್ ಶಾಪ್ ಗಳ ಲಾಬಿಗೆ ಮಣಿದು ಜನ ಔಷಧಿ ಕೇಂದ್ರಗಳಿಗೆ ಅವಕಾಶ ನೀಡುತ್ತಿಲ್ಲವೋ ಅಥವಾ ಪ್ರಧಾನಮಂತ್ರಿಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ ಎಂಬ ಅಸೂಯೆಯೋ?. ಈಗ ಒಂದು ವೇಳೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಬರೆದುಕೊಟ್ಟ ಚೀಟಿಯಲ್ಲಿರುವ ಔಷಧಿ ಸ್ಟಾಕ್ ಇಲ್ಲದಿದ್ದರೆ ಪಾಪ ಬಡವರು ಏನು ಮಾಡಬೇಕು? ಅದರಿಂದ ಏನಾದರೂ ಅನಾಹುತ ಆದರೆ ಅದಕ್ಕೆ ಯಾರು ಹೊಣೆ? ಎಂದು ಕೇಳಿದ್ದಾರೆ.


Leave a Comment

Your email address will not be published. Required fields are marked *