ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ಭೂ ಗ್ಯಾರಂಟಿ ಯೋಜನೆ ಮೂಲಕ 1 ಕೋಟಿಗೂ ಹೆಚ್ಚು ಜನರಿಗೆ ಭೂ ದಾಖಲಾತಿ ಪತ್ರ ನೀಡಿ ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಈಗಾಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದೀಗ ಇವುಗಳ ಜೊತೆಗೆ ಮತ್ತೊಂದು ಗ್ಯಾರಂಟಿಯನ್ನು ಜಾರಿ ಮಾಡಿದೆ. ಹಾಗಾದ್ರೆ ಅದು ಯಾವುದು ಹಾಗೂ ಯಾರಿಗೆಲ್ಲಾ ಉಪಯುಕ್ತ ಆಗಲಿದೆ ಎನ್ನುವ ಸಂಪೂರ್ಣ ಮಾಹಿತಿ.
ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆ ವಿಜಯನಗರದ ಹೊಸಪೇಟೆಯಲ್ಲಿ ನಡೆಯಲಿರುವ ಸಾಧನೆ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಡಿಕೆ ಶಿವಕುಮಾರ್ ಅವರು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. ನೂರು ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ನಮ್ಮ ಸರ್ಕಾರ ಕಂದಾಯ ಇಲಾಖೆ ಮೂಲಕ ಮಾಡಿ, ಹೊಸ ಇತಿಹಾಸ ಬರೆಯುತ್ತಿದೆ ಎಂದರು. ಈಗಾಗಲೇ ಈ ಕಾರ್ಯಕ್ರಮದಲ್ಲಿ ಲೋಪದೋಷಗಳಿವೆಯೇ ಇಲ್ಲವೇ ಎಂದು ಅಧಿಕಾರಿಗಳ ಜೊತೆ ಭಾನುವಾರ ನಡೆಸಿದ ಸಭೆಯಲ್ಲಿ ಪರಿಶೀಲಿಸಲಾಗಿದೆ. ಕಂದಾಯ ಇಲಾಖೆಯ ಮೂಲಕ ನೀಡುತ್ತಿರುವ ಭೂ ಗ್ಯಾರಂಟಿ ಇತಿಹಾಸದ ಪುಟ ಸೇರಲಿದೆ. ಪ್ರತಿಯೊಬ್ಬ ವ್ಯಕ್ತಿಗೂ ತಾನು ವಾಸವಿರುವ ಜಾಗವನ್ನು ತನ್ನದಾಗಿಸಿಕೊಳ್ಳುವ ಆಸೆ ಇದ್ದೇ ಇರುತ್ತದೆ. ಪರಿಶಿಷ್ಟರು, ಹಿಂದುಳಿದವರು ಹಾಗೂ ಭೂರಹಿತವಾಗಿರುವವರು ಕಳೆದ ಹಲವು ವರ್ಷಗಳಿಂದ ದಾಖಲೆ ಇಲ್ಲದೆ ಮನೆ ಕಟ್ಟಿಕೊಂಡು ಪರದಾಡುತ್ತಿದ್ದರು. ಆದ್ದರಿಂದ ನಮ್ಮ ಸರ್ಕಾರ ಇದಕ್ಕೆ ಪರಿಹಾರ ನೀಡಿದೆ ಎಂದರು.
4 ಸಾವಿರ ಅಡಿವರೆಗಿನ ಕಂದಾಯ ಅಥವಾ ಖಾಸಗಿ ಭೂಮಿಯಲ್ಲಿ ತುಂಬಾ ವರ್ಷಗಳಿಂದ ವಾಸ ಇರುವ ಜಾಗವನ್ನು ಸರ್ಕಾರ ವಶಕ್ಕೆ ಪಡೆದು, ತಹಶೀಲ್ದಾರ್ ಅದರ ಮಾಲೀಕತ್ವರಾಗಿ, ನಂತರ ಅವರ ಮೂಲಕ ಉಪ ನೋಂದಣಿ ಕಚೇರಿಯಲ್ಲಿ ಕ್ರಯದ ರೂಪದಲ್ಲಿ ಜನರಿಗೆ ಈ ಭೂಮಿಯನ್ನು ಉಚಿತವಾಗಿ ನೀಡುವ ವ್ಯವಸ್ಥೆ ಮಾಡಲಾಗಿದೆ. 1,11,11,111 ಆಸ್ತಿ ದಾಖಲೆ ಸಿದ್ಧವಾಗಿದ್ದು, ಆಯಾ ತಾಲೂಕುಗಳಲ್ಲಿ ತಹಶೀಲ್ದಾರ್ ಅವರು ಆಸ್ತಿಯ ದಾಖಲೆ ನೀಡಲಿದ್ದಾರೆ ಎಂದು ತಿಳಿಸಿದರು. ಈ ರೀತಿ ದಾಖಲೆ ಪಡೆದ ಆಸ್ತಿಯನ್ನು ಯಾರೂ 15 ವರ್ಷಗಳ ಕಾಲ ಮಾರಾಟ ಮಾಡುವಂತಿಲ್ಲ. ಈ ದಾಖಲೆಗಳನ್ನು ತಹಶೀಲ್ದಾರ್ ಅವರು ನೋಂದಣಿ ಮಾಡಿ ಆಸ್ತಿ ಮಾಲೀಕರಿಗೆ ನೀಡುತ್ತಿದ್ದಾರೆ. ಪಿಡಿಒ ಇಲಾಖೆ ಜೊತೆಗೂಡಿ ಖಾತೆ ಮಾಡಿಸಿಕೊಡಲಾಗುವುದು. ಇದಕ್ಕೆ ನೀಡಬೇಕಾದ ಶುಲ್ಕ ಪಾವತಿಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ತಿಳಿಸಿದರು. ವಿಜಯನಗರ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಿದೆ. ಅಲ್ಲದೆ, 79 ಸಾವಿರ ರೈತರಿಗೆ ಪೋಡಿ ದಾಖಲೆ ನೀಡಲಾಗಿದೆ. ಇಡೀ ದೇಶಕ್ಕೆ ಇದು ಹೊಸ ಮಾದರಿ. ನಮ್ಮ ಸರ್ಕಾರ ಎರಡು ವರ್ಷ ಪೂರೈಸಿದ್ದು, ಕೇವಲ ಸಂಭ್ರಮಾಚರಣೆ ಮಾಡಲು ಈ ಕಾರ್ಯಕ್ರಮ ಮಾಡುತ್ತಿಲ್ಲ. ಜನರು ನಮಗೆ ಕೊಟ್ಟ ಅವಕಾಶ, ಆಶೀರ್ವಾದಕ್ಕೆ ಋಣ ತೀರಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ನಾವು ಕೇವಲ ಗ್ಯಾರಂಟಿ ಯೋಜನೆಗಳು, ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕು ಕಟ್ಟಿಕೊಟ್ಟು ರಾಜಕಾರಣ ಮಾಡುತ್ತಿದ್ದೇವೆ ಎಂದು ಹೇಳಿದರು.





